ಪೂರ್ಣಚಂದ್ರ ತೇಜಸ್ವಿ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಪೂರ್ಣಚಂದ್ರ ತೇಜಸ್ವಿ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಶನಿವಾರ, ಏಪ್ರಿಲ್ 12, 2008

ಪೂರ್ಣಚಂದ್ರ ತೇಜಸ್ವಿ ಮತ್ತೆ ಬಂದಿದ್ದಾರೆ!

ಸುಮ್ನೆ ಮಾಡೋಕೇನೂ ಕೆಲಸ ಇಲ್ಲದಿದ್ದಾಗ, ಅಥವಾ ಆಫೀಸಿಂದ ಬೇಗ ಹೊರಟರೆ ಗಾಂಧೀ ಬಜಾರಲ್ಲಿ ಒಂದ್ ಸುತ್ ಹೊಡೆಯೋದು ಅಭ್ಯಾಸ ನನಗೆ. ಗಾಂಧಿ ಬಜಾರು ಅಂದರೆ ಐಸ್ ಥಂಡರು, ಮಹಾಲಕ್ಷ್ಮೀ ಟಿಫನ್ ರೂಮು ಮತ್ತು ಅಂಕಿತ ಬುಕ್ ಸ್ಟಾಲು.

ಮೊನ್ನೆ ಹೀಗೇ ಅಂಕಿತಕ್ಕೆ ಹೋದೆ, ವಿನಾಕಾರಣ. ಯಾವುದಾದರೂ ಹೊಸ ಪುಸ್ತಕ ಇದೆಯಾ ಅಂತ ಹುಡುಕಾಡಿದೆ. ಕಾಣಲಿಲ್ಲ. ಬೇಕಾದ್ದು ಇರಲಿಲ್ಲ. ಎಂದಿನ ಹಾಗೆ ತೇಜಸ್ವಿ ಪುಸ್ತಕ ಇದ್ದ ಸಾಲುಗಳನ್ನು ನೋಡಿದೆ. ಅದೊಂದು ಅಭ್ಯಾಸ ನನಗೆ. ಎಟ್ ಲೀಸ್ಟ್ ಅವರ ಹಳೆಯ ಪುಸ್ತಕಗಳ ಹೊಸ ಮುಖಪುಟ ವಿನ್ಯಾಸಗಳನ್ನಾದರೂ ನೋಡಿ, ಹಾಗೇ ಆ ಪುಸ್ತಕಗಳನ್ನ ಮತ್ತೆ ಎಲ್ಲಿತ್ತೋ ಅಲ್ಲಿಡುತ್ತೇನೆ. ಮೊನ್ನೆ ಮಾತ್ರ ಅತ್ಯಂತ ಅಚ್ಚರಿ ಕಾದಿತ್ತು ನನಗೆ. ತೇಜಸ್ವಿಯವರ ಹೊಸ ಪುಸ್ತಕವೊಂದು ಬೆಚ್ಚಗೆ ಕುಳಿತಿತ್ತು ಅಲ್ಲಿ. ಹೌದು ಕಣ್ರೀ, ನಮ್ಮ ಪೂರ್ಣಚಂದ್ರ ತೇಜಸ್ವಿಯವರ ಹೊಸ- ಹೊಚ್ಚ ಹೊಸ ಪುಸ್ತಕ! ಖುಷಿಯಿಂದ ಕಿರಿಚುವುದೊಂದು ಬಾಕಿ. ನನ್ನ ಯದ್ವಾ ತದ್ವಾ ಹಾವಭಾವದ ಕಣ್ಣು- ಮುಖಗಳನ್ನು ನೋಡಿ ಶ್ರೀಮತಿ ಕಂಬತ್ತಳ್ಳಿಯವರು , "ಇವತ್ತಷ್ಟೇ ಬಂತು ಈ ಪುಸ್ತಕ" ಅಂದರು.

"ಪಾಕಕ್ರಾಂತಿ ಮತ್ತು ಇತರ ಕಥೆಗಳು" ಅನ್ನುವುದು ಕಥಾ ಸಂಕಲನದ ಹೆಸರು. 1998 ರಿಂದ 2007ರ ವರೆಗೆ - ಲಂಕೇಶ್ ಪತ್ರಿಕೆಯಿಂದ ಹಿಡಿದು ವಿಕ್ರಾಂತ ಕರ್ನಾಟಕದವರೆಗೆ ಪ್ರಕಟವಾದ ಎಂಟು ಕಥೆಗಳಿವೆ ಇದರಲ್ಲಿ. ನಾನಂತೂ ದೇವರಾಣೆಯಾಗೂ ಒಂದೂ ಕಥೆಯನ್ನು ಈ ಮೊದಲು ಓದಿರಲಿಲ್ಲ. ತೇಜಸ್ವಿ ಈಗತಾನೇ ಕೂತು ಈ ಕಥೆಗಳನ್ನ ಬರೆದು ಮುಗಿಸಿ, ಪಬ್ಲಿಶ್ ಮಾಡಿಸಿದ್ದಾರೆ ಅನ್ನಿಸಿತು ನನಗಂತೂ. ಪುಸ್ತಕ ಪ್ರಕಾಶನಕ್ಕೆ ಸಾವ್ರ ಧನ್ಯವಾದ!

ಬೆನ್ನುಡಿಯಲ್ಲಿ ಹೇಳಿದ ಹಾಗೆ, " ಪೂರ್ಣಚಂದ್ರ ತೇಜಸ್ವಿಯವರು ನಮ್ಮ ತಲೆಮಾರಿನ ಒಂದು ಅದ್ಭುತ ಪ್ರತಿಭೆ ಹಾಗೂ ಪ್ರಕ್ರಿಯೆ. ಅವರ ಅನುಪಸ್ಥಿತಿಯಲ್ಲಿ ಅವರು ಸೃಷ್ಟಿಸಿರುವ ಲೋಕದ ಬಂಧಿಗಳು ನಾವು".

ನಾನಂತೂ ಇಲ್ಲಿನ ಕಥೆಗಳಲ್ಲಿ ಏನಿದೆ ಅಂತ ಒಂದು ಸಾಲೂ ಹೇಳುವುದಿಲ್ಲ. ತಗಂಡು ಓದಿ. ಅಂಕಿತಕ್ಕೋ, ಸಪ್ನಾಕ್ಕೋ ಹೋಗಿ, ಬೆಂಗಳೂರಿಗರು. ಮಂಗಳೂರಿಗರಿಗೆ ಅತ್ರಿ, ಮೈಸೂರಲ್ಲಿ ಗೀತಾ ಬುಕ್ ಹೌಸು..

ಪೋಸ್ಟ್ ಮುಖಾಂತರ:
ಪುಸ್ತಕ ಪ್ರಕಾಶನ,
ಬುಕ್ ಪೋಸ್ಟ್ ಸರ್ವೀಸ್,
ಪೋಸ್ಟ್ ಬಾಕ್ಸ್ ನಂ:58,
ಮೂಡಿಗೆರೆ-577132,
ಚಿಕ್ಕಮಗಳೂರು ಜಿಲ್ಲೆ,
ಫೋನು- 08263-228353,240202

ಹ್ಯಾಪಿ ರೀಡಿಂಗು!.